ಶಿವಮೊಗ್ಗ : ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲಾ ವೃಂದ ಸಂಘಗಳು, ಶಿವಮೊಗ್ಗ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಅಧಿಕಾರಿಗಳು, ನೌಕರರು, ಕಪ್ಪುಬಟ್ಟೆ ಧರಿಸಿ, ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಶಿಕುಮಾರ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಎಲ್ಲಾ ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳಿವೆ. ಇಲಾಖೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಆಸ್ಪತ್ರೆಗಳಿಗೆ ಔಷಧಿಯನ್ನು ಪೂರೈಸುವಂತೆ ಒತ್ತಾಯಿಸಿ, ಹಲವು ಬಾರಿ ಇಲಾಖೆಯ ಸಚಿವರುಗಳೊಂದಿಗೆ ಸಭೆ ನಡೆಸಿದ್ದೇವೆ. ಫೆ.13ರಂದು ಕೂಡ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದರಿಂದ ಮುಂದಿನ ಹಂತವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಯಿತು ಎಂದರು.
ಮಾ.11ರಿಂದ ಮಾ.15ರ ವರೆಗೆ ಮುಷ್ಕರ ಮಾಡುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ಧಿಷ್ಟ ಅವಧಿವರೆಗೆ ಗೈರು ಹಾಜರಾಗುವ ಮೂಲಕ ನಮ್ಮ ಮುಷ್ಕರವನ್ನು ಮುಂದುವರೆಸುತ್ತೇವೆ. ಸರ್ಕಾರ ಇದಕ್ಕೆ ಅವಕಾಶ ಕೊಡದೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್ಕುಮಾರ್ ಮಾತನಾಡಿ, ಆರೋಗ್ಯ ಇಲಾಖೆಯವರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘದ ಬೆಂಬಲವಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರುಗಳಾದ ಡಾ|| ನಾಗೇಂದ್ರಪ್ಪ, ಡಾ|| ನಾಗರಾಜ್ನಾಯ್ಕ, ಪಾಪಣ್ಣ, ಮ.ಸ. ನಂಜುಂಡಸ್ವಾಮಿ, ಶಂಕರ್, ಮಂಜುಳಾ ಪಿ., ಇಂದಿರಮ್ಮ, ಡಾ|| ಗುಡದಪ್ಪ, ಅಶೋಕ್, ನರಸಿಂಹ, ವಿಜಯ್ ಆ್ಯಂಟೋನಿ ಸೇರಿದಂತೆ ಹಲವರಿದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com













